ಬೆಂಗಳೂರು | ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಚುನಾವಣೆ ಕ್ಷಣ ಕ್ಷಣಕ್ಕೂ ರಂಗೇರುತ್ತಿದೆ

ಬೆಂಗಳೂರು

ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಚುನಾವಣೆ ಕ್ಷಣ ಕ್ಷಣಕ್ಕೂ ರಂಗೇರುತ್ತಿದೆ. ಕೆ ಎಸ್ ಸಿ ಎ ಗೆ ಲೆಜೆಂಡರಿ ಕ್ರಿಕೆಟರ್ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಅವಿರೋಧ ಆಯ್ಕೆ ಘೋಷಣೆ ಬೆನ್ನಲ್ಲೇ ಕೋರ್ಟ್ ಕಟಕಟೆ ಏರಿದ್ದ ಮಾಜಿ ಅಧ್ಯಕ್ಷ ಬ್ರಿಜೇಶ್ ಪಟೇಲ್ ಬಣ ಇದೀಗ ಹೋರಾಟ ಮುಂದುವರೆಸಿದ್ದು ಮತ್ತೊಂದು ಮಗ್ಗಲು ಪಡೆದಿದೆ.

ಇನ್ನೂರು ರೂಪಾಯಿ ಹಿಂಬಾಕಿ ಪಾವತಿಸಿಲ್ಲ ಎಂಬ ಕಾರಣಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿಯ (KSCA) ಅಧ್ಯಕ್ಷ ಹುದ್ದೆಗೆ ಸಲ್ಲಿಸಿದ ನಾಮಪತ್ರವನ್ನು ತಿರಸ್ಕರಿಸಿದ್ದ ಚುನಾವಣಾಧಿಕಾರಿ ಕ್ರಮ ಪ್ರಶ್ನಿಸಿ ಕೆ.ಎನ್‌.ಶಾಂತಕುಮಾರ್‌ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್​​ ಪುರಸ್ಕರಿಸಿದೆ.

ಕೆಎಸ್‌ಸಿಎ ಚುನಾವಣೆಯಲ್ಲಿ ಕೆ.ಎನ್.ಶಾಂತಕುಮಾರ್ ಅವರಿಗೆ ಸ್ಪರ್ಧಿಸಲು ಅವಕಾಶ ನೀಡಿ ಕೋರ್ಟ್​ ಆದೇಶ ನೀಡಿದೆ. ನಾಮಪತ್ರ ತಿರಸ್ಕರಿಸಿದ್ದ ಚುನಾವಣಾಧಿಕಾರಿ ಕ್ರಮ ರದ್ದುಗೊಳಿಸಿ, ಈಗಾಲೇ ನೀಡಿರುವ ವೇಳಾಪಟ್ಟಿಯಂತೆ ಡಿ.7 ರಂದೇ ಚುನಾವಣೆಗೆ ನಡೆಸಲು ನ್ಯಾ.ಸೂರಜ್ ಗೋವಿಂದರಾಜ್ ಅವರನ್ನೊಳಗೊಂಡ ನ್ಯಾಯಪೀಠ ಆದೇಶ ನೀಡಿದೆ.

ಅಧ್ಯಕ್ಷ ಸ್ಥಾನಕ್ಕೆ ಶಾಂತ್ ಕುಮಾರ್ ಕೆ ಎನ್ ಅವರ ನಾಮಪತ್ರ ತಿರಸ್ಕರಿಸಿದ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್, ಶಾಂತಕುಮಾರ್ ರನ್ನು ಅಭ್ಯರ್ಥಿ ಎಂದು ಪರಿಗಣಿಸಿ ಸ್ಪಷ್ಟ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವಂತೆ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಿದೆ.

ಕೆ.ಎನ್‌.ಶಾಂತಕುಮಾರ್‌ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್​​​ ವಿಚಾರಣೆ ಕೈಗೆತ್ತಿಕೊಂಡು, ಎರಡು ಕಡೆಯ ವಾದ- ಪ್ರತಿವಾದವನ್ನು ಆಲಿಸಿ, ತೀರ್ಪು ನೀಡಿದೆ.

ಈಗಾಗಲೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದೀಗ ಕೋರ್ಟ್​​​ ಈ ಆದೇಶವನ್ನು ನೀಡಿರುವುದು ಗೊಂದಲಕ್ಕೆ ಕಾರಣವಾಗಿದೆ. ಮುಂದಿನ ತಿಂಗಳ ಡಿಸೆಂಬರ್ 7ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್​ ಸೂಚಿಸಿದೆ. ಆದರೆ, ಚುನಾವಣೆಗೂ ಮುನ್ನವೇ ವೆಂಕಟೇಶ್ ಪ್ರಸಾದ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

Author