ಶಿವಮೊಗ್ಗ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಗಾಂಜಾ ವ್ಯಸನಿಗಳ ಅಟ್ಟಹಾಸ ಹಾಗೂ ಹಿಂದೂ ಸಮಾಜದ ಮೇಲೆ ನಡೆಯುತ್ತಿರುವ ಸರಣಿ ದೌರ್ಜನ್ಯಗಳನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸಿದ್ದಲ್ಲಿ ತಕ್ಷಣ ಸಂಘಟನೆಯ ಕಾರ್ಯಕರ್ತರನ್ನು ಸಂಪರ್ಕಿಸುವಂತೆ ವಿಶ್ವ ಹಿಂದೂ ಪರಿಷದ್ ಶಿವಮೊಗ್ಗ ಜಿಲ್ಲಾ ಘಟಕ ಮನವಿ ಮಾಡಿದೆ.
ಸುದ್ದಿಗೋಷ್ಟಿಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಜಿಲ್ಲಾಧ್ಯಕ್ಷ ವಾಸುದೇವ ಮಾತನಾಡಿ, ಗಾಂಜಾ ಮತ್ತು ಮಾದಕ ವಸ್ತುಗಳ ಹಾವಳಿಯನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ.
ಮುಸ್ಲಿಂ ಯುವಕರು ಉದ್ದೇಶಪೂರ್ವಕವಾಗಿ ಗಾಂಜಾ ಸೇವಿಸಿ ಹಿಂದೂಗಳ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ದೂರಿದರು.
ವಿಶೇಷವಾಗಿ ಹೆಣ್ಣುಮಕ್ಕಳ ಜೊತೆ ಅಶ್ಲೀಲವಾಗಿ ವರ್ತಿಸಿ ಭಯ ಹುಟ್ಟಿಸುವ ನೀಚ ಕೃತ್ಯಗಳು ಹೆಚ್ಚುತ್ತಿವೆ. ಇಷ್ಟೆಲ್ಲಾ ದೌರ್ಜನ್ಯ ನಡೆಯುತ್ತಿದ್ದರೂ ಸರ್ಕಾರ ಮಾತ್ರ ಮೌನ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಎಂದರು.
ಸೂಳೆಬೈಲ್ನಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಪೊಲೀಸರು ಇದನ್ನು ಕೇವಲ ಕ್ರಿಕೆಟ್ ವಿಚಾರದ ಗಲಾಟೆ ಎಂದು ಬಿಂಬಿಸುತ್ತಿರುವುದು ತಪ್ಪು ಮಾಹಿತಿಯಾಗಿದೆ. ಇದು ಹಿಂದೂ ಬಾಲಕನನ್ನು ಗುರಿಯಾಗಿಸಿಕೊಂಡು ನಡೆದ ಪೂರ್ವ ಯೋಜಿತ ಕೃತ್ಯವಾಗಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದರು.
ಸಾಗರ ತಾಲೂಕಿನಲ್ಲಿಯೂ ಅಪ್ರಾಪ್ತ ಬಾಲಕರು ಹಿಂದೂ ಯುವಕರ ಮೇಲೆ ಹಲ್ಲೆ ನಡೆಸಿರುವುದು ಹಾಗೂ ಗಣಪತಿ ಮೆರವಣಿಗೆಯ ಮೇಲೆ ಎಂಜಲು ಉಗುಳುವಂತಹ ವಿಕೃತ ಕೃತ್ಯ ಎಸಗಿರುವುದು ಸಮಾಜದ ಶಾಂತಿ ಕದಡುವ ಪ್ರಯತ್ನವಾಗಿದೆ.
ಇದೇ ರೀತಿ ಶಿರಾಳಕೊಪ್ಪದಲ್ಲಿಯೂ ಗಾಂಜಾ ವ್ಯಸನಿಗಳು ಹಿಂದೂ ಯುವಕರನ್ನು ಅಡ್ಡಗಟ್ಟಿ ದೌರ್ಜನ್ಯ ಎಸಗಿದ್ದಾರೆ ಎಂದರು.
ಅನ್ಯಾಯಕ್ಕೊಳಗಾದವರು ಭಯಪಡುವ ಅಗತ್ಯವಿಲ್ಲ, ಸಂಘಟನೆಯು ಸದಾ ನಿಮ್ಮ ಬೆಂಬಲಕ್ಕೆ ಇರಲಿದೆ. ಸಾಮಾಜಿಕ ಸುಧಾರಣೆ ಮತ್ತು ನ್ಯಾಯಕ್ಕಾಗಿ ಸಂಘಟನೆ ಹೋರಾಟ ಮುಂದುವರಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ಶಿವಮೊಗ್ಗ ಜಿಲ್ಲೆಯನ್ನು ಶೀಘ್ರವೇ ಮಾದಕ ವಸ್ತು ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿದ ಅವರು, ಗಾಂಜಾ ಮಾರಾಟಗಾರರು ಮತ್ತು ಸೇವನೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಒಂದು ವೇಳೆ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.



