ಶಿವಮೊಗ್ಗ | ಒಳಮೀಸಲಾತಿ ಜಾರಿಗೆ ಅಗ್ರಹಿಸಿ ಪ್ರತಿಭಟನೆ, ಭುಗಿಲೆದ್ದ ಆಕ್ರೋಶ

ಶಿವಮೊಗ್ಗ

ಶಿವಮೊಗ್ಗ,ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಜಿಲ್ಲಾ ಮಾದಾರ ಮಹಾಸಭಾ ಇಂದು ಹಮ್ಮಿಕೊಂಡಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳಿಗೆ ನುಗ್ಗುವ ಪ್ರಯತ್ನಮನಡೆಸಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.

ಬೆಳಗ್ಗೆ 11.30ಕ್ಕೆ ಮಹಾನಗರ ಪಾಲಿಕೆ ಆವರಣದಲ್ಲಿನ ಡಾ,ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಹಾರ ಸಮರ್ಪಿಸಿ ಅರಂಭಗೊಂಡ ಪ್ರತಿಭಟನಾ ಮೆರವಣಿಗೆಯಲ್ಲಿ ಮಾದಿರ ಸಮುದಾಯದ ನೂರಾರು ಜನರು ಶಿವಪ್ಪನಾಯಕ ವೃತ್ತ, ಅಮೀರ್ ಆಹಮ್ಮದ್ ಸರ್ಕಲ್, ಸೀನಪ್ಪ ಶೆಟ್ಟಿ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿತು.

ಅಮೀರ್ ಆಹಮ್ಮದ್ ವೃತ್ತದಲ್ಲಿ ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಂಚಿ, ಕ್ರಾಂತಿಗೀತೆಗಳನ್ನು ಹಾಡುವ ಮೂಲಕ ಒಳಮೀಸಲಾತಿ ಜಾರಿಗೆ ಸರ್ಕಾರ ಅನುಸರಿಸುತ್ತಿರುವ ವಿಳಂಬ ನೀತಿಯನ್ನು ಖಂಡಿಸಿದರು.ಶೀನಪ್ಪ ಶೆಟ್ಟಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ್ದರಿಂದ ವಾಹನಗಳ ಸಂಚಾರ ಕೆಲ ಕಾಲಸ್ತಗಿತಗೊಂಡಿತ್ತು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿಗೆ ಬರುತ್ತಿದ್ದಂತೆ ಪೊಲೀಸರ ತಡೆಗೋಡೆಗಳನ್ನು ಬೇಧಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ನುಗ್ಗಲು ಯತ್ನಿಸಿದರು.

ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ನಡೆಯಿತು. ನಂತರ ಮುಖಂಡರ ಮಧ್ಯಪ್ರವೇಶದೊಂದಿಗೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಜಿಲ್ಲಾಧಿಕಾರಿಗಳ ಕಟ್ಟಡದ ಮೆಟ್ಟಿಲುಗಳ ಮೇಲೆಯೆ ಬಹಿರಂಗ ಸಭೆ ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ಜಿಲ್ಲಾ ಮಾದಾರ ಮಹಾ ಸಭಾದ ಜಿಲ್ಲಾ ಪ್ರಧಾನಕಾರ್ಯದರ್ಶಿ ಆರ್.ತೇಜೇಸ್ ಸುಪ್ರೀಂಕೋರ್ಟು ಒಳಮೀಸಲಾತಿ ಪರ ತೀರ್ಪು ನೀಡಿದ್ದರೂ, ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಅನಗತ್ಯ ವಿಳಂಬ ಅನುಸರಿಸುತ್ತಿದೆ.

35 ವರ್ಷಗಳಿಂದ ಒಳಮೀಸಲಾತಿಗಾಗಿ ಮಾದಿಗಸಮುದಾಯ ಹೋರಾಟ ಮಾಡಿಕೊಂಡು ಬಂದಿದ್ದು, ಅದನ್ನು ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ. ಮಾ.27 ರಂದು ನಡೆಯಲಿರುವ ಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರಒಳಮೀಸಲಾತಿ ಜಾರಿಯ ತೀರ್ಮಾನ ಕೈಗೊಳ್ಳಬೇಕು.

ಇಲ್ಲದೇ ಹೋದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.ವಕೀಲ ನಿರಂಜನ್ ಅವರು ಮಾತನಾಡಿ ರಾಜ್ಯ ಸರ್ಕಾರ 56 ಸಾವಿರ ಹುದ್ದೆಗಳನ್ನು ನೇಮಕ ಮಾಡಲು ಮುಂದಾಗಿದ್ದು, ಅದರಲ್ಲಿ ಒಳಮೀಸಲಾತಿ ಅಳವಡಿಸದೆ ಇರುವುದು ಮಾದಿಗ ಸಮುದಾಯಕ್ಕೆ ಘೋರ ಅನ್ಯಾಯವಾಗಲಿದೆ.

ರಾಜ್ಯ ಸರ್ಕಾರ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾಗಿ ಅಳವಡಿಸದೆ ನೇಮಕಾತಿ ಪ್ರಕ್ರಿಯೆ ನಡೆಸಬಾರದು ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿಗಳ ಪರವಾಗಿ ಹೆಚ್ಚುವರಿ ಜಿಲ್ಲಾಧಿಕಾರಿಗಳು ಅಭಿಷೇಕ್ ಮನವಿ ಸ್ವೀಕರಿಸಿದರು.ಜಿಲ್ಲಾ ಮಾದಾರ ಮಹಾಸಭಾ ಅಧ್ಯಕ್ಷ. ಶಿವಾಜಿ, ಮುಖಂಡರಾದ ತಿಮ್ಲಾಪುರಲೋಕೇಶ್, ಶಿವಣ್ಣ ಮಾತನಾಡಿದರು.

ಮಹಾಸಭಾದ ಮುಖಂಡರಾದ ಸೂಲಯ್ಯ, ಮಂಜುನಾಥ್, ಪಿ,ಅಣ್ಣಪ್ಪ, ಕೆ ಅಣ್ಣಪ್ಪ, ಹೊಳೆಹೊನ್ನೂರು ರಮೇಶ್ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

ಅಲೆಮಾರಿ ಸಮುದಾಯದ ಮುಖಂಡ ಲೋಕೇಶ್ ಚಾವಡಿ, ಸಮಗಾರ ಸಮುದಾಯದ ಮುಖಂಡರಾದ ಚಂದ್ರಶೇಖರ್ ಖಾನ್ ಪೇಟ್, ಉಮೇಶ್ ಅವರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.

ಪ್ರತಿಭಟನೆ ಹಿನ್ನಲೆಯಲ್ಲಿ ಡಿವೈಎಸ್‌ಪಿಗಳಾದ ಬಾಬು ಅಂಜನಪ್ಪ, ಸಂಜೀವ್ ಕುಮಾರ್ ನೇತೃತ್ವದಲ್ಲಿವ್ಯಾಪಕ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿತ್ತು.

Author