ಶಿವಮೊಗ್ಗ, ಸಮಾಜದ ಪ್ರತಿಯೊಬ್ಬರೂ ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಟ್ರಾಫಿಕ್ ಪೊಲೀಸ್ ವೈ.ಸುರೇಶ್ ಕುಮಾರ್ ಹೇಳಿದರು.
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಹಾಗೂ ಜಿಲ್ಲಾ ಸಂಸ್ಥೆ ಶಿವಮೊಗ್ಗ, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಬೆಂಗಳೂರು ಸಹಯೋಗದಲ್ಲಿ ಶಿವಮೊಗ್ಗ ಸ್ಕೌಟ್ಸ್ ಭವನದಲ್ಲಿ ಆಯೋಜಿಸಿದ್ದ ಯುವ ಆಪತ್ ಮಿತ್ರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಶಿಬಿರದಲ್ಲಿ ಮಾತನಾಡಿ, ಪ್ರತಿನಿತ್ಯ ರಸ್ತೆಯಲ್ಲಿ ಸಾವಿರಾರು ಜನರು ತಮ್ಮ ಅಮೂಲ್ಯವಾದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ರಸ್ತೆ ಅಪಘಾತಗಳನ್ನು ತಪ್ಪಿಸಲು ನಾವು ನೀವೆಲ್ಲರೂ ನಿಯಮಗಳನ್ನು ಪಾಲಿಸಲೇಬೇಕು ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ವ್ಹೀಲಿಂಗ್ ಮಾಡುವುದು, ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವುದು ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವುದರಿಂದ ಅಪಘಾತಗಳ ಪ್ರಮಾಣ ಸಂಖ್ಯೆ ಹೆಚ್ಚುತ್ತಿದೆ. ಯುವಜನರು ವಾಹನ ಓಡಿಸುವಾಗ ಏಕಾಗ್ರತೆಯಿಂದ ಎಚ್ಚರಿಕೆ ವಹಿಸಬೇಕು ಎಂದರು.
ಈಗಾಗಲೇ ಶಿವಮೊಗ್ಗದಲ್ಲಿ ನಾಲ್ಕು ಸಾವಿರ ಸಿಸಿ ಕ್ಯಾಮರಾಗಳು ಚಾಲನೆಯಲ್ಲಿವೆ. ಬರುವ ದಿನಗಳಲ್ಲಿ ಹೊಸ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯವರು ಸಾಕಷ್ಟು ಶ್ರಮವಹಿಸುತ್ತಿದ್ದಾರೆ.
ಇಂತಹ ಜಾಗೃತಿ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ತಿಳಿಸುವುದರ ಮುಖಾಂತರ ಅಪಘಾತಗಳನ್ನು ತಪ್ಪಿಸಬೇಕು. 18 ವರ್ಷದ ಒಳಗಿನ ಮಕ್ಕಳು ವಾಹನ ಓಡಿಸಿದರೆ ವಾಹನದ ಮಾಲೀಕರಿಗೆ 25,000 ರೂ. ದಂಡ ವಿಧಿಸಲಾಗುತ್ತದೆ ಎಂದು ಹೇಳಿದರು.
ವಾಹನವನ್ನು ಸರಿಯಾಗಿ ಅಭ್ಯಾಸ ಮಾಡಿ ಪರವಾನಿಗೆ ಪಡೆದು ವಾಹನ ಚಲಾಯಿಸಬೇಕು. ದ್ವಿಚಕ್ರ ವಾಹನದಲ್ಲಿ ಇಬ್ಬರು ಮಾತ್ರ ಸವಾರಿ ಮಾಡಬೇಕು. ಹೆಲ್ಮೇಟ್ಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಮಾತನಾಡಿ, ಇಂತಹ ಜಾಗೃತಿ ಕಾರ್ಯಕ್ರಮಗಳಿಂದ ಜಿಲ್ಲೆಯ 19 ಕಾಲೇಜುಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ಬಹಳ ಉಪಯೋಗವಾಗುತ್ತದೆ. ಸಾಕಷ್ಟು ಅಪಘಾತಗಳನ್ನು ಸಹ ತಪ್ಪಿಸಬಹುದಾಗಿದೆ.
ವಿದ್ಯಾರ್ಥಿಗಳು ಇಂತಹ ಶಿಬಿರದ ಉಪಯೋಗವನ್ನು ಪಡೆದುಕೊಳ್ಳಬೇಕು. ಈ ಒಂದು ವಾರಗಳ ಕಾಲ ನಡೆಯುವ ವಿವಿಧ ರೀತಿಯ ಶಿಬಿರಗಳಲ್ಲಿ ಪಾಲ್ಗೊಂಡು ಸದ್ವಿನಿಯೋಗ ಮಾಡಿಕೊಳ್ಳಬೇಕು ಎಂದು ನುಡಿದರು.
ಜಿಲ್ಲಾ ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ರಾಜೇಶ್ ಅವಲಕ್ಕಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಸುಮನಾ ಶೇಖರ್, ಗೈಡ್ ಆಯುಕ್ತೆ ಲಕ್ಷ್ಮೀ ಕೆ.ರವಿ, ಜಿಲ್ಲಾ ಕಾರ್ಯದರ್ಶಿ ಕೆ.ವಿ.ಚಂದ್ರಶೇಖರಯ್ಯ, ಮಲ್ಲಿಕಾರ್ಜುನ್ ಕಾನೂರ್ ಹಾಗೂ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.



