ಬೆಳಗಾವಿ | ಪತಿ ಪತ್ನಿ ದುರಂತ ಅಂತ್ಯ

ಬೆಳಗಾವಿ

ಬೆಳಗಾವಿ, ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗೆ ಧಾವಿಸುತ್ತಿದ್ದ ಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ.

ಮಧುರಾ ಕರೆಪ್ಪ ಮಾದರ (30), ಕರೆಪ್ಪ ಗಂಗಪ್ಪ ಮಾದರ(36) ಮೃತ ದಂಪತಿಗಳು.‌ ಮಧುರಾ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತಕ್ಷಣ ಅವರನ್ನು ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೇ ಮಧುರಾ ಕೊನೆಯುಸಿರೆಳೆದಿದ್ದಾರೆ.

ಪತ್ನಿ ನೋಡಲು ಹೋಗುವಾಗ ಪತಿ ಸಾವು:

ಇತ್ತ ಪತ್ನಿ ಆಸ್ಪತ್ರೆ ಸೇರಿದ ಸುದ್ದಿ ಕೇಳಿ ಬೆಳಗಾವಿಗೆ ತರಾತುರಿಯಲ್ಲಿ ಬೈಕ್​ನಲ್ಲಿ ಬರುತ್ತಿದ್ದ ಪತಿ ಕರೆಪ್ಪ ಅರವಳ್ಳಿ ಕ್ರಾಸ್ ಬಳಿ ಧಾರವಾಡದಿಂದ ವೇಗವಾಗಿ ಬರುತ್ತಿದ್ದ ಕೆಎಸ್ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕರೆಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಒಂದೇ ದಿನ ಪತಿ, ಪತ್ನಿ ಮೃತಪಟ್ಟಿರುವುದರಿಂದ ಅರವಳ್ಳಿ ಗ್ರಾಮದಲ್ಲಿ ಶೋಕ ವಾತಾವರಣ ನಿರ್ಮಾಣವಾಗಿದೆ. ಮಕ್ಕಳು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮಧುರಾ ಮತ್ತು ಕರೆಪ್ಪ ದಂಪತಿ ಮದುವೆ ಆಗಿ 9 ವರ್ಷ ಆಗಿತ್ತು. ಇವರಿಗೆ ಒಂದು ಹೆಣ್ಣು, ಎರಡು ಗಂಡು ಮಕ್ಕಳಿದ್ದಾರೆ. ಈಗ ಒಂದೇ ದಿನ ತಂದೆ-ತಾಯಿಯನ್ನು ಕಳೆದುಕೊಂಡು ಮೂವರು ಮಕ್ಕಳು ಅನಾಥರಾಗಿದ್ದಾರೆ.

ದೇವರು ಈ ಕುಟುಂಬಕ್ಕೆ ಅನ್ಯಾಯ ಮಾಡಿತಾ ಅಂತಾ ಗ್ರಾಮಸ್ಥರು ಮಮ್ಮಲ ಮರಗುತ್ತಿದ್ದಾರೆ‌. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Author