ಶಿವಮೊಗ್ಗ | ನೂತನ ನೀರಿನ ಶುದ್ಧೀಕರಣ ಘಟಕ ಸ್ಥಾಪನೆಗೆ ಹಾಗೂ ತಾಂತ್ರಿಕ ಅಡಚಣೆ ನಿವಾರಣೆಗೆ ಶಾಸಕರ ಪ್ರಯತ್ನ.!

ಶಿವಮೊಗ್ಗ

“ಶಿವಮೊಗ್ಗ, ನಗರಕ್ಕೆ ಕುಡಿಯುವ ನೀರು ಪೂರೈಸುವ ವ್ಯವಸ್ಥೆಯನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುವ ಹಾಗೂ ಶುದ್ಧೀಕರಣ ಪ್ರಕ್ರಿಯೆಯಲ್ಲಿ ಕಂಡುಬರುತ್ತಿರುವ ತಾಂತ್ರಿಕ ಅಡಚಣೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತೀರ್ಥಹಳ್ಳಿ ರಸ್ತೆಯ ನೀರಿನ ಶುದ್ಧೀಕರಣ ಘಟಕಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಶಾಸಕರು, “ನಗರದ ಕುಡಿಯುವ ನೀರಿನ ಬೇಡಿಕೆ ಹೆಚ್ಚುತ್ತಿದ್ದು, ಹಾಲಿ ಇರುವ ಘಟಕದ ಮೇಲೆ ಒತ್ತಡ ಹೆಚ್ಚಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಇತ್ತೀಚೆಗೆ ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಸುರೇಶ್ ಅವರನ್ನು ಭೇಟಿ ಮಾಡಿ, ಶಿವಮೊಗ್ಗಕ್ಕೆ ಮತ್ತೊಂದು ನೂತನ ಕುಡಿಯುವ ನೀರಿನ ಶುದ್ಧೀಕರಣ ಘಟಕವನ್ನು ಮಂಜೂರು ಮಾಡುವಂತೆ ಅಧಿಕೃತ ಮನವಿ ಸಲ್ಲಿಸಲಾಗಿದೆ.

ಸರ್ಕಾರದ ಮಟ್ಟದಲ್ಲಿ ಈ ಯೋಜನೆಯನ್ನು ತ್ವರಿತವಾಗಿ ಅನುಮೋದನೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ,” ಎಂದು ತಿಳಿಸಿದರು.

ಇದೇ ವೇಳೆ ನೀರು ಸರಬರಾಜಿನ ಪ್ರತಿಯೊಂದು ಹಂತದಲ್ಲೂ ಕಟ್ಟುನಿಟ್ಟಾದ ಶುದ್ಧೀಕರಣ ಮಾನದಂಡಗಳನ್ನು ಅನುಸರಿಸಲು ನೀರು ಸರಬರಾಜು ಮಂಡಳಿಯ ಇಂಜಿನಿಯರ್‌ಗಳಿಗೆ ಸೂಚಿಸಿದರು.

ಪೈಪ್‌ಲೈನ್ ಸೋರಿಕೆ ತಡೆಗಟ್ಟುವುದು ಮತ್ತು ಎಲ್ಲಾ ವಾರ್ಡ್‌ಗಳಿಗೆ ಸಮಾನವಾಗಿ ನೀರು ಹಂಚಿಕೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಭೇಟಿಯ ಸಂದರ್ಭದಲ್ಲಿ ನಾಗರಿಕರ ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Author