ಸದ್ಯ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸ್ಟಾರ್ ಏರ್ ಸಂಸ್ಥೆಯ ವಿಮಾನಗಳು ಮಾತ್ರ ಹಾರಾಟ ನಡೆಸುತ್ತಿದ್ದು, ಶಿವಮೊಗ್ಗದಿಂದ ಹೈದ್ರಾಬಾದ್, ಗೋವಾ ಹಾಗೂ ತಿರುಪತಿಗೆ ಪ್ಲೈಟ್ಗಳು ಹಾರಾಡುತ್ತಿವೆ. ಇಂಡಿಗೋ ಹಾಗು ಸ್ಪೈಸ್ ಜೆಟ್ಗಳು ಹಾರಾಟ ನಿಲ್ಲಿಸಿದೆ. ಈ ನಿಟ್ಟಿನಲ್ಲಿ ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆ ಪುನಾರಂಭಿಸಿ ಎಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಒತ್ತಾಯಿಸಿದೆ.
ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆಯನ್ನು ಪುನಾರಂಭ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿರುವ ಸಚಿವ ಎಂ.ಬಿ. ಪಾಟೀಲ್, ಉಡಾನ್ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಇದನ್ನು ಸೇರಿಸಲೂ ಆಗ್ರಹಿಸಿದ್ದಾರೆ. ಈ ಕುರಿತು ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡುರವರಿಗೆ ಪತ್ರಬರೆದಿರುವ ಎಂಪಿ ಪಾಟೀಲ್ ಈ ವಿಮಾನದ ಪುನಾರಂಭವು ಮಲೆನಾಡು ಮತ್ತು ಮಧ್ಯ ಕರ್ನಾಟಕದ ಪ್ರಗತಿಗೆ ನಿರ್ಣಾಯಕವಾಗಿದೆ ಎಂದು ಉಲ್ಲೇಖಿಸಿದ್ದಾರೆ.
ಇಂಡಿಗೋ ಸಂಸ್ಥೆಯ ಪ್ಲೈಟ್ ಶಿವಮೊಗ್ಗ- ಬೆಂಗಳೂರು (Bengaluru-Shivamogga Flight) ನಡುವೆ ಕಾರ್ಯಾಚರಣೆ ನಡೆಸುತ್ತಿತ್ತು. ಆದರೆ, ಕೆಲ ತಿಂಗಳಿನಿಂದ ಇದು ಸ್ಥಗಿತ ಗೊಂಡಿದೆ. ಶಿವಮೊಗ್ಗ ಚಿಕ್ಕಮಗಳೂರು, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳ ಆರ್ಥಿಕ, ಕೃಷಿ ಪ್ರವಾಸೋದ್ಯಮ ಮತ್ತು ಕೈಗಾರಿಕಾ ಬೆಳವಣಿಗೆಗೆ ಇದರಿಂದ ಹಾನಿಯಾಗಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯ ಒದಗಿಸುವ ಕಾಮಗಾರಿ ಭರದಿಂದ ಸಾಗಿದೆ. ಇದಲ್ಲದೆ, ಉಳಿದ ಎಲ್ಲಾ ಸೌಲಭ್ಯಗಳೂ ಇಲ್ಲಿ ಈಗಾಗಲೇ ಇವೆ. ಆದ್ದರಿಂದ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಪಾಟೀಲ ಕೋರಿದ್ದಾರೆ.


