ಶಿವಮೊಗ್ಗ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ದುರ್ಬಳಕೆ ತಡೆಗಾಗಿ ಗೃಹಲಕ್ಷಿö್ಮ ಮತ್ತು ಗೃಹಜ್ಯೋತಿ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾನುಭವಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ಹಾಗೂ ಜಿಲ್ಲಾ ಫಲಾನುಭವಿಗಳಿಗೆ ಗುರುತಿನ ಚೀಟಿ ನೀಡಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರವು ಸ್ವಾಗತಿಸುತ್ತದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ್ ತಿಳಿಸಿದರು.
ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಚೇರಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ, ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೆಳಕಂಡ ವಿಷಯಗಳನ್ನು ಅಂಗೀಕರಿಸಿದರು. ‘ಗೃಹಲಕ್ಷ್ಮಿ’ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯೊಂದರಲ್ಲೇ ಸುಮಾರು 9,247 ಫಲಾನುಭವಿಗಳು ನಿಧನರಾಗಿದ್ದರೂ, ಅವರ ಬ್ಯಾಂಕ್ ಖಾತೆಗಳಿಗೆ ಇನ್ನೂ ಹಣ ಜಮೆ ಆಗುತ್ತಿರುವುದು ಹಾಗೂ ಅದನ್ನು ಬೇರೆಯವರು ಪಡೆಯುತ್ತಿರುವುದು ಬೆಳಕಿಗೆ ಬಂದಿದೆ.
ಒಂದೇ ಮನೆಯಲ್ಲಿ ಇಬ್ಬರು ಅಥವಾ ಮೂವರು ಮಹಿಳೆಯರು ಯಜಮಾನಿಯರಾಗಿ ಸೌಲಭ್ಯ ಪಡೆಯುತ್ತಿರುವ ಪ್ರಕರಣಗಳೂ ಪತ್ತೆಯಾಗಿದ್ದು, ಇಂತಹ ಪ್ರಸಂಗಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಪರಿಷ್ಕರಿಸಲು ಸೂಚಿಸಲಾಗಿದೆ. ಸರ್ಕಾರಕ್ಕೆ ಆದಾಯ ತೆರಿಗೆ ಪಾವತಿಸುವವರು ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತಿರುವುದು ಪತ್ತೆಯಾಗಿದೆ.
ಜಿಲ್ಲೆಯ ವರದಿಯ ಪ್ರಕಾರ ಇಂತಹ 5,618 ಅನರ್ಹರು ಯೋಜನೆಯ ಲಾಭ ಪಡೆಯುತ್ತಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ. ಹೀಗಾಗಿ ಇಂತಹ ಅನರ್ಹರನ್ನು ಫಲಾನುಭವಿಗಳ ಪಟ್ಟಿಯಿಂದ ತಕ್ಷಣವೇ ತೆಗೆದುಹಾಕಲು ಕಟ್ಟುನಿಟ್ಟಿನ ಕ್ರಮ ಅನಿವಾರ್ಯವಾಗಿದೆ ಎಂದು ಸಭೆ ತಿಳಿಸಿದೆ.
ಉಚಿತ ವಿದ್ಯುತ್ ದುರ್ಬಳಕೆ – ವಾಣಿಜ್ಯ ಬಳಕೆಗೆ ಬ್ರೇಕ್: ‘ಗೃಹಜ್ಯೋತಿ’ ಯೋಜನೆಯಡಿ ಗೃಹಬಳಕೆಗಾಗಿ ನೀಡಲಾಗುವ 200 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯವನ್ನು ದುರುಪಯೋಗಪಡಿಸಿಕೊಂಡು, ಕೆಲವರು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವುದು ಕಂಡುಬಂದಿದೆ. ಅಲ್ಲದೆ, ಒಬ್ಬರ ಹೆಸರಲ್ಲೇ ಒಂದಕ್ಕಿಂತ ಹೆಚ್ಚು ಮೀಟರ್ಗಳಿರುವುದು ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ ಬಾಡಿಗೆ ಮನೆಗಳಲ್ಲಿ ನಿಜವಾದ ಫಲಾನುಭವಿಗಳಿದ್ದಾರೆಯೇ ಅಥವಾ ಬೇರೆಯವರಿದ್ದಾರೆಯೇ ಎಂದು ಸೂಕ್ತ ತನಿಖೆ ನಡೆಸಿ ಸರಿಪಡಿಸಲು ಆದೇಶಿಸಲಾಗಿದೆ.


