ಹೊಸನಗರ,ರಿಪ್ಪನ್ಪೇಟೆ, ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ದೊರಕಲಿ ಎಂಬ ಆಶಯದೊಂದಿಗೆ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ನಡೆಸಿದರು.
ಇತ್ತೀಚೆಗೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ಅನೇಕ ಸಚಿವರು ಕೂಡ ಅವರೊಂದಿಗೆ ಅಧಿಕಾರ ಸ್ವೀಕರಿಸಿದ್ದರು ಆಗ ಮೊದಲ ಹಂತದ ಸಚಿವರ ಪಟ್ಟಿಯಲ್ಲಿ ಬೇಳೂರು ಗೋಪಾಲಕೃಷ್ಣ ಅವರ ಹೆಸರು ಸೇರ್ಪಡೆಯಾಗಬಹುದು ಎಂಬ ನಿರೀಕ್ಷೆ ಕ್ಷೇತ್ರದ ಜನರಲ್ಲಿ ಮೂಡಿತ್ತು.ಆದರೆ ಸಚಿವರ ಪಟ್ಟಿಯಲ್ಲಿ ಅವರ ಹೆಸರು ಕಾಣಿಸದ ಹಿನ್ನೆಲೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರಲ್ಲಿ ನಿರಾಸೆ ವ್ಯಕ್ತವಾಗಿತ್ತು.
ಜೂನ್ ತಿಂಗಳ ಕೊನೆಯಲ್ಲಿ ನಡೆಯುವ ಸಾಧ್ಯತೆಯಿರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಬೇಳೂರು ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ದೊರಕಲೇಬೇಕು ಎಂದು ಆಶಿಸಿ ಯೂತ್ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಮಳವಳ್ಳಿ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಅವರು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮುಡಿ ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.
ಅಲ್ಲದೆ ಕರಾವಳಿಯ ಆರಾಧ್ಯ ದೈವ ಸ್ವಾಮಿ ಕೊರಗಜ್ಜನಿಗೂ ವಿಶೇಷ ಪೂಜೆ ಸಲ್ಲಿಸಿ, ಬೇಳೂರು ಗೋಪಾಲಕೃಷ್ಣ ಅವರು ಈ ಬಾರಿ ಸಚಿವರಾಗುವಂತೆ ಪ್ರಾರ್ಥನೆ ಮಾಡಿದರು.
ಸಾಗರ-ಹೊಸನಗರ ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸೇವೆ ಅಪಾರವಾಗಿದೆ. ಹಿಂದುಳಿದ ಸಮುದಾಯಗಳ ಧ್ವನಿಯಾಗಿ ಅವರು ಕೆಲಸ ಮಾಡುತ್ತಿದ್ದಾರೆ. ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಸಚಿವ ಸ್ಥಾನ ದೊರೆಯಬೇಕು ಎಂಬುದು ಕ್ಷೇತ್ರದ ಜನರ ಬಹುದಿನಗಳ ಬೇಡಿಕೆಯಾಗಿದೆ.
ಈ ನಿಟ್ಟಿನಲ್ಲಿ ದೇವರ ಆಶೀರ್ವಾದಕ್ಕಾಗಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದ್ದೇವೆ. ಪಕ್ಷದ ನಾಯಕತ್ವವು ಕ್ಷೇತ್ರದ ಜನರ ಭಾವನೆಗಳಿಗೆ ಸ್ಪಂದಿಸಿ ಅವರಿಗೆ ಸಚಿವ ಸ್ಥಾನ ನೀಡಲಿದೆ ಎಂಬ ವಿಶ್ವಾಸವಿದೆ ಎಂದು ಯೂಥ್ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಮಳವಳ್ಳಿ ಮತ್ತು ಫ್ಯಾನ್ಸಿ ರಮೇಶ್ ಸುದ್ದಿಗಾರರೊಂದಿಗೆ ಹಂಚಿಕೊಂಡರು.


