ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಬಳ್ಳಿಬೈಲು ಗ್ರಾಮದಲ್ಲಿ ಸಾಲಬಾಧೆಯಿಂದ ಬೇಸತ್ತ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಬಳ್ಳಿಬೈಲು ಗ್ರಾಮದ ನಿವಾಸಿ ಗೋಪಾಲ್.ಎಂ (56) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ರೈತ.
ಮನೆಯ ಹಿಂಬದಿಯಲ್ಲಿದ್ದ ಮಾವಿನ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಗೋಪಾಲ್ ಮೃತದೇಹ ಪತ್ತೆಯಾಗಿದೆ.
ಮೃತ ರೈತ ಗೋಪಾಲ್ ಅವರು ಬ್ಯಾಂಕ್ಗಳು, ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸೇರಿದಂತೆ ಹಲವೆಡೆ ಸುಮಾರು 5 ಲಕ್ಷ ರೂಪಾಯಿಗೂ ಅಧಿಕ ಕೈಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಸಾಲ ತೀರಿಸಲಾಗದ ಚಿಂತೆಯಲ್ಲಿದ್ದ ಅವರು, ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದುಬಂದಿದೆ.ಗೋಪಾಲ್ ತುಂಬಾ ಸಮಯದವರೆಗೆ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಆತಂಕಗೊಂಡು ಹುಡುಕಾಟ ನಡೆಸಿದ್ದಾರೆ.
ಈ ವೇಳೆ ಮನೆಯ ಹಿತ್ತಲಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



