ಅಸ್ಸಾಂ ಸಿಎಂ ಆಗಿ 2ನೇ ಬಾರಿಗೆ ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕಾರ

ಅಸ್ಸಾಂ

ಅಸ್ಸಾಂ ರಾಜ್ಯದ ನೂತನ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಇಂದು ಪ್ರಮಾಣ ವಚನ ಸ್ವೀಕರಿಸಿದರು.ಖಾನಾಪಾರಾದ ವೆಟರಿನರಿ ಕಾಲೇಜು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಹಿಮಂತ ಬಿಸ್ವಾ ಶರ್ಮಾ ಸತತ 2ನೇ ಬಾರಿಗೆ ಅಸ್ಸಾಂ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ರಾಜಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ಹಿಮಂತ ಬಿಸ್ವ ಶರ್ಮ ಅವರಿಗೆ ಹುದ್ದೆ ಮತ್ತು ಗೌಪ್ಯತಾ ಪ್ರಮಾಣವಚನ ಬೋಧಿಸಿದರು.

ಈ ಭವ್ಯ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದು, ಈ ಪೈಕಿ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವರು, ಬಿಜೆಪಿ ಹಿರಿಯ ನಾಯಕರು, ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಗಣ್ಯರು ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ಖಾನಾಪಾರಾದ ವೆಟರಿನರಿ ಕಾಲೇಜು ಮೈದಾನಕ್ಕೆ ಆಗಮಿಸಿದರು.

ಪ್ರಮಾಣವಚನ ಸ್ವೀಕರಿಸಿದ ಬಳಿಕ ಹಿಮಂತ ಬಿಸ್ವ ಶರ್ಮ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ಪ್ರಧಾನಿ ಮೋದಿ ಮಾತ್ರವಲ್ಲದೇ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಸರ್ಬಾನಂಜ ಸೋನಾವಾಲ್, ಪಬಿತ್ರಾ ಮಾರ್ಗೆರಿಟಾ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ಮಾತ್ರವಲ್ಲದೇ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಿಬಿನ್ ಕೂಡ ಪ್ರಮಾಣವಚನ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಈ ಪ್ರಮಾಣವಚನ ಸಮಾರಂಭದೊಂದಿಗೆ ಅಸ್ಸಾಂನಲ್ಲಿ ಎನ್‌ಡಿಎ ಮೈತ್ರಿಕೂಟದ ಸತತ ಮೂರನೇ ಸರ್ಕಾರ ರಚನೆಯಾಗಿದೆ. ಪ್ರಮಾಣ ವಚನ ಸ್ವೀಕಾರ ಬಳಿಕ ಮುಖ್ಯಮಂತ್ರಿಯಾಗಿ ಎರಡನೇ ಅವಧಿ ಆರಂಭಿಸಿರುವ ಹಿಮಂತ ಬಿಸ್ವ ಶರ್ಮ ಅವರು ಅಭಿವೃದ್ಧಿ, ಮೂಲಸೌಕರ್ಯ, ಉದ್ಯೋಗ ಸೃಷ್ಟಿ ಮತ್ತು ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡುವುದಾಗಿ ಹೇಳಿದರು.ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಮುಂದುವರಿದ ಆಡಳಿತಕ್ಕೆ ಈ ಪ್ರಮಾಣವಚನ ಸಮಾರಂಭವು ಮಹತ್ವದ ಘಟ್ಟವೆಂದು ಪರಿಗಣಿಸಲಾಗಿದೆ.

ಬಿಜೆಪಿ ನೇತೃತ್ವದ ಮೈತ್ರಿಕೂಟವು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಹಿಮಂತ ಬಿಸ್ವ ಶರ್ಮ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಎನ್‌ಡಿಎ ಮೈತ್ರಿಕೂಟವು 126 ಸ್ಥಾನಗಳಲ್ಲಿನ 102 ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಮರಳಿದೆ. ಇದರಲ್ಲೂ ಭಾರತೀಯ ಜನತಾ ಪಕ್ಷವು ಒಂಟಿಯಾಗಿ 82 ಸ್ಥಾನಗಳನ್ನು ಗೆದ್ದಿದೆ.

Author