ಭದ್ರಾವತಿ ತಾಲೂಕಿನಲ್ಲಿ ಬಾಲಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ದಿನಾಂಕ 09-09-2026 ರಂದು ಜಂಟಿ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿ, ಒಟ್ಟು 05 ಮಕ್ಕಳನ್ನು ರಕ್ಷಿಸಲಾಗಿದೆ.
ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಆಶ್ರಿತಾ ಸ್ವಯಂ ಸೇವಾ ಸಂಸ್ಥೆ (ಭದ್ರಾವತಿ) ಇವರುಗಳ ಜಂಟಿ ಭಾಗವಹಿಸುವಿಕೆಯೊಂದಿಗೆ ಈ ಕಾರ್ಯಾಚರಣೆ ನಡೆಯಿತು.ಭದ್ರಾವತಿ ನಗರದ ವಿವಿಧ ವಾಣಿಜ್ಯ ಸಂಸ್ಥೆಗಳು, ಗ್ಯಾರೇಜುಗಳು ಹಾಗೂ ಗ್ರಾಮೀಣ ಪ್ರದೇಶದ ಅಲೆಮಾರಿ ತಾಣಗಳಲ್ಲಿ ಕೈಗೊಂಡ ವಿಶೇಷ ಪರಿಶೀಲನೆ ವೇಳೆ 03 ಬಾಲಕಾರ್ಮಿಕರು ಹಾಗೂ 02 ಕಿಶೋರ ಕಾರ್ಮಿಕರು ಕೆಲಸ ಮಾಡುತ್ತಿರುವುದು ಕಂಡುಬಂದಿದೆ.
ರಕ್ಷಿಸಲ್ಪಟ್ಟ ಮಕ್ಕಳನ್ನು ತಕ್ಷಣವೇ ಕೆಲಸದ ಸ್ಥಳದಿಂದ ಬಿಡುಗಡೆಗೊಳಿಸಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿ ದಾಖಲಿಸಲಾಗಿದೆ. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ತಪ್ಪು ಎಸಗಿದ ಮಾಲೀಕರು ಪ್ರತಿಯೊಂದು ಮಗುವಿಗೆ 20,000 ರೂ. ಗಳನ್ನು ಮಕ್ಕಳ ಪುನರ್ವಸತಿ ಕಲ್ಯಾಣ ನಿಧಿಗೆ ಪಾವತಿಸಬೇಕಾಗುತ್ತದೆ.
ಶಿಕ್ಷಣದ ಹಕ್ಕು: ಉಚಿತ ಮತ್ತು ಕಡ್ಡಾಯ ಶಿಕ್ಷಣವು ಪ್ರತಿಯೊಂದು ಮಗುವಿನ ಹಕ್ಕಾಗಿದ್ದು, ಇದನ್ನು ಒದಗಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.
ದೂರು ಸಲ್ಲಿಸಬಹುದಾದ ಇಲಾಖೆಗಳು: ಪೋಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ದೂರು ನೀಡಬಹುದು.
ಸಹಾಯವಾಣಿ ಸಂಖ್ಯೆಗಳು:ಮಕ್ಕಳ ಸಹಾಯವಾಣಿ: 1098ಕಾರ್ಮಿಕರ ಸಹಾಯವಾಣಿ: 155214ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ (ಬೆಂಗಳೂರು): 080-22115291/92 ನ್ನು ಸಂಪರ್ಕಿಸಬಹುದು.
ದಾಳಿ ವೇಳೆ ಮೇಲ್ಕಂಡ ವಿಷಯಗಳು ಹಾಗೂ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರ ಕುರಿತು ಮಾಲೀಕರಿಗೆ ಕಾನೂನು ಅರಿವು ಮೂಡಿಸಲಾಯಿತು.
ಈ ಜಂಟಿ ಕಾರ್ಯಾಚರಣೆಯಲ್ಲಿ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕ ನಿರೀಕ್ಷಕರು, ಯೋಜನಾ ನಿರ್ದೇಶಕರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ, ಪೊಲೀಸ್ ಇಲಾಖೆ ಹಾಗೂ ಆಶ್ರಿತಾ ಸ್ವಯಂ ಸೇವಾ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.





